ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.